![](https://i0.wp.com/samajamukhi.net/wp-content/uploads/2020/01/cal_2020_copy-1.jpg?resize=820%2C500&ssl=1)
![](https://i0.wp.com/samajamukhi.net/wp-content/uploads/2021/08/S-scaled.jpg?fit=2560%2C1810&ssl=1)
![yaddi](https://i0.wp.com/naanugauri.com/wp-content/uploads/2019/08/yaddi1-696x407.jpg?resize=696%2C407)
ಕೊರೊನ ಲಾಕ್ಡೌನ್ ಅನ್ನು ವಿಸ್ತರಿಸುವ ಬಗ್ಗೆ ಸಮಗ್ರವಾಗಿ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನ ವೈರಸ್ ಪ್ರಕರಣವೂ ವೇಗವಾಗಿ ಏರಿಕೆಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಸಾರ್ವಜನಿಕರು ಈಗಾಗಲೇ ಸರಕಾರ ಘೋಷಿಸಿರುವ ಲಾಕ್ಡೌನ್ ಅನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ, ಅಲ್ಲದೆ ಲಾಕ್ಡೌನ್ ಸಮಯವನ್ನು ವಿಸ್ತರಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.
“ವಿಶ್ವದಾದ್ಯಂತ ಕೊರೋನ ವೈರಸ್ ಸೋಂಕಿನಿಂದ ಉಂಟಾಗುತ್ತಿರುವ ಹಾನಿ ಎಲ್ಲರಿಗೂ ತಿಳಿದಿದೆ. ಪ್ರಧಾನಿಯವರು ದೇಶದ ಜನರ ಜೀವ ರಕ್ಷಣೆಗಾಗಿ ದೇಶಾದ್ಯಂತ ಲಾಕ್ಡೌನ್ ಘೋಷಣೆ ಮಾಡಿದ್ದು, ನಮ್ಮ ರಾಜ್ಯದಲ್ಲಿಯೂ ಬೀದರ್, ಮೈಸೂರು, ಮಂಗಳೂರು, ಬೆಂಗಳೂರು ನಗರ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಗಣನೀಯವಾಗಿ ಹೆಚ್ಚುತ್ತಿದೆ” ಎಂದು ಯಡಿಯೂರಪ್ಪ ಕಳವಳ ವ್ಯಕ್ತಪಡಿಸಿದ್ದಾರೆ.
“ಕೊರೋನ ವೈರಸ್ ಸೋಂಕು ನಿಯಂತ್ರಣಕ್ಕಾಗಿ ಗಡಿ ಪ್ರದೇಶಗಳನ್ನು ಮುಚ್ಚುವುದು, ಸಾರ್ವಜನಿಕವಾಗಿ ಹೆಚ್ಚು ಹೆಚ್ಚು ಓಡಾಡುವಂತಹ ಪ್ರದೇಶಗಳಿಗೆ ನಿರ್ಬಂಧಗಳನ್ನು ವಿಧಿಸಿರುವುದು, ಧಾರ್ಮಿಕ ಸ್ಥಳಗಳಲ್ಲಿ ಜನರು ಸೇರದಂತೆ ನಿರ್ಬಂಧಿಸುವುದುರ ಜತೆಗೆ ಕೊರೊನ ವೈರಸ್ ಸೋಂಕು ಹರಡದಂತೆ ನಿಯಂತ್ರಿಸುವ ನಿಟ್ಟಿನಲ್ಲಿ ಸರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ” ಎಂದು ಮುಖ್ಯಮಂತ್ರಿ ತಮ್ಮ ಪತ್ರಿಕಾ ಪ್ರಕಟನೆಯಲ್ಲಿ ಹೇಳಿದ್ದಾರೆ.
ಪ್ರಧಾನ ಮಂತ್ರಿಯವರು ಘೋಷಿಸಿದ ದೇಶ ವ್ಯಾಪಿ ಲಾಕ್ಡೌನ್ ಅವಧಿ ಎಪ್ರಿಲ್ 14ರಂದು ಮುಕ್ತಾಯವಾಗಲಿದ್ದು, ಇದನ್ನು ವಿಸ್ತರಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಸಮಗ್ರವಾಗಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಬೇಕಾಗುತ್ತದೆ. ಆದ್ದರಿಂದ ಈ ಕುರಿತು ಸಲಹೆ-ಸೂಚನೆ ನೀಡಬೇಕು ಎಂದು ಹೇಳಿದ್ದಾರೆ.
ರಾಜ್ಯದ ಜನತೆ ಲಾಕ್ಡೌನಿನ ಉದ್ದೇಶವನ್ನು ಹಾಗೂ ಲಾಕ್ಡೌನ್ ಉಲ್ಲಂಘನೆಯಿಂದ ದೇಶ ಎದುರಿಸ ಬೇಕಾಗಬಹುದಾದ ಅಪಾಯವನ್ನು ಅರಿತುಕೊಂಡು ಕಟ್ಟುನಿಟ್ಟಾಗಿ ಲಾಕ್ಡೌನ್ ಆದೇಶ ಪಾಲಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಜನತೆಗೆ ಕರೆ ನೀಡಿದ್ದಾರೆ.
![](https://i0.wp.com/samajamukhi.net/wp-content/uploads/2021/08/1--scaled.jpg?fit=1810%2C2560&ssl=1)