

ಸಾರಿಗೆ ನೌಕರರ ಮುಷ್ಕರ ಅಂತ್ಯ: ಬಸ್ ಗಳ ಸಂಚಾರ ಶುರು, ಜನತೆ ನಿರಾಳ!
ನಾಲ್ಕು ದಿನಗಳಿಂದ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಅಂತ್ಯವಾಗಿದೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಅನುಮತಿಸಿದ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆದಿರುವುದಾಗಿ ನೌಕರರ ಸಮ್ಮುಖದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ.


ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸಿಬ್ಬಂದಿ ಸಂಘಟನೆಗಳು ನಡೆಸುತ್ತಿದ್ದ ಮುಷ್ಕರ ಅಂತ್ಯಗೊಂಡಿದ್ದು, ನೌಕರರು ತಮ್ಮ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಹಲವು ನಾಟಕೀಯ ತಿರುವುಗಳನ್ನು ಪಡೆದ ಸಾರಿಗೆ ಸಂಸ್ಥೆ ಸಿಬ್ಬಂದಿ ಪ್ರಮುಖರ ಮುಷ್ಕರ ಕೊನೆಗೂ ಅಂತ್ಯಗೊಂಡಿದೆ. ಸರ್ಕಾರ ಹಲವು ಸುತ್ತಿನ ಮಾತುಕತೆ ನಂತರ ಅಂತಿಮವಾಗಿ ಮಷ್ಕರ ಕೈಬಿಡಲು ಸಾರಿಗೆ ಸಿಬ್ಬಂದಿ ಸಂಘಟನೆಗಳು ತೀರ್ಮಾನಿಸಿವೆ.
ಕಳೆದ ನಾಲ್ಕು ದಿನಗಳಿಂದ ರಸ್ತೆ ಸಾರಿಗೆ ಸಂಸ್ಥೆಗಳ ನೌಕರರು ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಮುಷ್ಕರ ನಡೆಸುತ್ತಿದ್ದರು. ಇಂದು ಸರ್ಕಾರದಿಂದ ಬೇಡಿಕೆಗಳ ಈಡೇರಿಕೆಗೆ ಲಿಖಿತ ರೂಪದಲ್ಲಿ ಭರವಸೆ ದೊರೆತ ಹಿನ್ನೆಲೆಯಲ್ಲಿ ನೌಕರರು ಮುಷ್ಕರವನ್ನು ಹಿಂಪಡೆದಿದ್ದಾರೆ.
ಹತ್ತು ಬೇಡಿಕೆಗಳ ಪೈಕಿ ಒಂಬತ್ತು ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಒಪ್ಪಿರುವ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನೌಕರರು ಮುಷ್ಕರವನ್ನು ಹಿಂಪಡೆದಿದ್ದಾರೆಂದು ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
ಸಾರಿಗೆ ಇಲಾಖೆ ಜವಾಬ್ದಾರಿ ಹೊತ್ತಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತನಾಡಿ, ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ, ಕೋವಿಡ್ ಸೋಂಕಿನಿಂದ ಮೃತಪಟ್ವ ನೌಕರರ ಕುಟುಂಬದವರಿಗೆ 30 ಲಕ್ಷ ರೂಪಾಯಿ ಪರಿಹಾರ, ಅಂತರ್ ನಿಗಮ ವರ್ಗಾವಣೆ, ತರಬೇತಿ ಅವಧಿಯನ್ನು2 ವರ್ಷದಿಂದ 1 ವರ್ಷಕ್ಕೆ ಕಡಿತ ಮಾಡುವುದೂ ಸೇರಿದಂತೆ ಚಾಲಕರಿಗೆ ವಿಶೇಷ ಭತ್ಯೆ, ಮೇಲಾಧಿಕಾರಿಗಳ ಕಿರುಕುಳ ತಡೆ ಸೇರಿದಂತೆ ನೌಕರರ 9 ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದ್ದಾರೆ.
ರಸ್ತೆ ಸಾರಿಗೆ ನಿಗಮ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಲು ಸಾಧ್ಯವಿಲ್ಲ, ಈ ಬಗ್ಗೆ ಆರ್ಥಿಕ ಇಲಾಖೆ ಮಾಹಿತಿ ನೀಡಿದೆ. ಈಗಾಗಲೇ ನೌಕರರು ರಾಜ್ಯದ ಹಲವೆಡೆ ಕರ್ತವ್ಯಕ್ಕೆ ಹಾಜರಾಗಿದ್ದು, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆಂದು ಲಕ್ಷ್ಮಣ ಸವದಿ ಹೇಳಿದ್ದಾರೆ.
ಮುಷ್ಕರದ ನಾಲ್ಕನೇ ದಿನವಾದ ಇಂದು ಬೆಳಿಗ್ಗೆಯಿಂದಲೇ ಬೆಂಗಳೂರು ಸೇರಿದಂತೆ ಕೆಲವೆಡೆ ಬಸ್ ಸಂಚಾರ ಆರಂಭಗೊಂಡಿತ್ತು. ಸಂಜೆ ವೇಳೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 310, ಬೆಂಗಳೂರು ಮಹಾನಗರ ಸಾರಿಗೆ ನಿಗಮ 211, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ 347 ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ 269 ಬಸ್ಗಳು ಸಂಚಾರ ಆರಂಭಿಸಿತ್ತು. ಮೈಸೂರು, ರಾಯಚೂರು, ಚಿಕ್ಕಮಗಳೂರು ಹಾಗೂ ಕೊಪ್ಪಳ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಧ್ಯಾಹ್ನದ ವೇಳೆಗೆ ಭಾಗಶಃ ಬಸ್ ಸಂಚಾರ ಪುನರಾರಂಭಗೊಂಡಿತ್ತು.
ಹೊಸ ಕೃಷಿ ಕಾನೂನುಗಳು ‘ರೈತ ವಿರೋಧಿ’, ಬಂಡವಾಳಶಾಹಿಗಳಿಗೆ ಲಾಭವಾಗುತ್ತದೆ: ಅರವಿಂದ್ ಕೇಜ್ರಿವಾಲ್
ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು ‘ರೈತ ವಿರೋಧಿ’ಯಾಗಿದ್ದು, ಅಪಾರ ಪ್ರಮಾಣದ ಹಣದುಬ್ಬರಕ್ಕೆ ಕಾರಣವಾಗುತ್ತದೆ ಮತ್ತು ಬಂಡವಾಳಶಾಹಿಗಳಿಗೆ ಲಾಭವಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು ‘ರೈತ ವಿರೋಧಿ’ಯಾಗಿದ್ದು, ಅಪಾರ ಪ್ರಮಾಣದ ಹಣದುಬ್ಬರಕ್ಕೆ ಕಾರಣವಾಗುತ್ತದೆ ಮತ್ತು ಬಂಡವಾಳಶಾಹಿಗಳಿಗೆ ಲಾಭವಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.
ಪ್ರತಿಭಟನಾ ನಿರತ ರೈತರಿಗೆ ಬೆಂಬಲವಾಗಿ ಇಂದು ಎಎಪಿ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ಪಕ್ಷದ ಕಚೇರಿಯಲ್ಲಿ ಇಂದು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದ ದೆಹಲಿ ಸಿಎಂ, ಹೊಸ ಕೃಷಿ ಕಾನೂನುಗಳು ಹಣದುಬ್ಬರಕ್ಕೆ ಪರವಾನಗಿ ನೀಡುತ್ತವೆ ಎಂದರು.
ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್ ಅವರು, ಜನರು ಬಯಸಿದಷ್ಟು ಸಂಗ್ರಹಿಸಬಹುದು ಎಂದು ಈ ಕಾನೂನು ಹೇಳುತ್ತದೆ. ಹೀಗಾಗಿ ರೈತರ ವಿಷಯದ ಬಗ್ಗೆ ಕೊಳಕು ರಾಜಕೀಯ ಮಾಡುವುದನ್ನು ನಿಲ್ಲಿಸುವಂತೆ ನಾನು ರಾಜಕೀಯ ಪಕ್ಷಗಳಿಗೆ ಮನವಿ ಮಾಡುತ್ತೇನೆ. ಈ ಕಾನೂನುಗಳು ರೈತ ವಿರೋಧಿ ಮತ್ತು ಜನ ಸಾಮಾನ್ಯರ ವಿರೋಧಿಯಾಗಿವೆ. ಇದರಿಂದ ಕೆಲವು ಬಂಡವಾಳಶಾಹಿಗಳಿಗೆ ಮಾತ್ರ ಅನುಕೂಲವಾಗುತ್ತದೆ. ಈ ಕಾನೂನುಗಳಿಂದ ಅಪಾರ ಹಣದುಬ್ಬರಕ್ಕೆ ಕಾರಣವಾಗುತ್ತದೆ ಎಂದು ಆರೋಪಿಸಿದರು.
ಈ ಕಾನೂನುಗಳಿಂದಾಗಿ, ಮುಂದಿನ ವರ್ಷಗಳಲ್ಲಿ ಗೋಧಿ ಬೆಲೆ ನಾಲ್ಕು ಪಟ್ಟು ಹೆಚ್ಚು ದುಬಾರಿಯಾಗಲಿದೆ ಎಂದು ದೆಹಲಿ ಸಿಎಂ ಹೇಳಿದರು. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
