

ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿರುವ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಮೊದಲ ನಿರ್ಣಯಗಳನ್ನು ಪ್ರಕಟಿಸಿದ್ದಾರೆ.

ಜುಲೈ 29 ರ ಗುರುವಾರ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯಲ್ಲಾಪುರ, ಅಂಕೋಲಾ, ಕಾರವಾರಗಳಲ್ಲಿ ಮಳೆ-ಪ್ರವಾಹ ಹಾನಿ ಸಮೀಕ್ಷೆ ನಡೆಸುವರು. ಯಲ್ಲಾಪುರಕ್ಕೆ ಬೆಳಿಗ್ಗೆ 11.45 ಕ್ಕೆ ಆಗಮಿಸುವ ಅವರು ಯಲ್ಲಾಪುರ, ಅಂಕೋಲಾಗಳಲ್ಲಿ ಪ್ರವಾಹ ಹಾನಿ ಪರಿಶೀಲಿಸಿ ಕಾರವಾರದಲ್ಲಿ ಸಭೆ ನಡೆಸಲಿದ್ದಾರೆ. ನಂತರ ಹುಬ್ಬಳ್ಳಿ ಮೂಲಕ ವಿಶೇಶ ವಿಮಾನದಲ್ಲಿ ಸಾಯಂಕಾಲ 7 ಕ್ಕೆ ಬೆಂಗಳೂರು ತಲುಪಲಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿರುವ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಮೊದಲ ನಿರ್ಣಯಗಳನ್ನು ಪ್ರಕಟಿಸಿದ್ದಾರೆ.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಸಿಎಂ ಬೊಮ್ಮಾಯಿ, ರೈತರ ಮಕ್ಕಳಿಗೆ ಅವರ ಉನ್ನತ ಶಿಕ್ಷಣ ಪ್ರೋತ್ಸಾಹ ನೀಡಲು ಮತ್ತು ವಿದ್ಯೆಯಿಂದ ವಂಚಿತರಾಗಬಾರದೆಂಬ ಉದ್ದೇಶಕ್ಕೆ ಹೊಸ ಶಿಷ್ಯ ವೇತನ ಯೋಜನೆ ಜಾರಿಗೊಳಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ. ಇದಕ್ಕಾಗಿ ಸರ್ಕಾರ 1 ಸಾವಿರ ಕೋಟಿ ಹಣ ಮೀಸಲಿಟ್ಟಿದೆ.
ಈಗಾಗಲೇ ಜಾರಿಯಲ್ಲಿರುವ ಸಂಧ್ಯಾ ಸುರಕ್ಷಾ ಯೋಜನೆಯಡಿ ಪಿಂಚಣಿಯನ್ನು ತಿಂಗಳಿಗೆ 1200 ರೂಪಾಯಿಗಳಿಗೆ ಏರಿಕೆ ಮಾಡುತ್ತಿದ್ದು ಇದರಿಂದ 35 ಲಕ್ಷ ಫಲಾನುಭವಿಗಳಿಗೆ ಲಾಭ ಉಂಟಾಗಲಿದೆ. ಸರ್ಕಾರಕ್ಕೆ 863 ಕೋಟಿ ರೂಪಾಯಿ ಹೆಚ್ಚು ಖರ್ಚಾಗಲಿದೆ ಎಂದು ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ವಿಧವಾ ವೇತನವನ್ನೂ ಬೊಮ್ಮಾಯಿ ನೇತೃತ್ವದ ಸರ್ಕಾರ 600 ರಿಂದ 800 ರೂಪಾಯಿಗಳಿಗೆ ಏರಿಕೆ ಮಾಡಲಾಗಿದ್ದು, 17.25 ಲಕ್ಷ ಫಲಾನುಭವಿಗಳಿಗೆ ಪ್ರಯೋಜನವಾಗಲಿದೆ ಹಾಗೂ 414 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ ಎಂದು ಸಿಎಂ ತಿಳಿಸಿದ್ದಾರೆ.
ಶೇ.40-70 ಅಂಗವೈಕಲ್ಯವಿರುವವರಿಗೆ ಮಾಸಿಕವಾಗಿ ಈಗ ನೀಡಲಾಗುತ್ತಿರುವ 600 ರೂಪಾಯಿಗಳ ವೇತನವನ್ನು 800 ರೂಗೆ ಏರಿಕೆ ಮಾಡಲಾಗಿದ್ದು, 3.66 ಸಾವಿರ ಫಲಾನುಭವಿಗಳು ಪ್ರಯೋಜನವಾಗಲಿದ್ದು ಸರ್ಕಾರದ ಬೊಕ್ಕಸಕ್ಕೆ 90 ಕೋಟಿ ಹೆಚ್ಚು ವೆಚ್ಚವಾಗಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
“ರೈತರ ಮಕ್ಕಳ ಉನ್ನತಿಯ ಬಗ್ಗೆ ಚಿಂತನೆ, ಬಡವರಿಗೆ ಸಹಾಯ ಮಾಡಲು ನನ್ನ ಸರ್ಕಾರದ ಆದ್ಯತೆ, ಈ ನಿಟ್ಟಿನಲ್ಲಿ ನನ್ನ ಚಿಂತನೆಯ ಮೊದಲ ಹೆಜ್ಜೆಯನ್ನು ಸಚಿವ ಸಂಪುಟದ ನಿರ್ಣಯದಲ್ಲಿ ಇಡಲಾಗಿದ್ದು, ಜನಕಲ್ಯಾಣ, ಬಡವ, ದೀನದಲಿತರ ಪರವಾಗಿ ಸರ್ಕಾರ ನಿಲ್ಲಲಿದೆ” ಎಂದು ಸಿಎಂ ಭರವಸೆ ನೀಡಿದ್ದಾರೆ.
ವಿಶ್ವಾಸಾರ್ಹ, ದಕ್ಷ, ಪಾರದರ್ಶಕ ಆಡಳಿತ: ತಂಡಸ್ಫೂರ್ತಿಯಿಂದ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಲಹೆ
ವಿಶ್ವಾಸಾರ್ಹ, ಜವಾಬ್ದಾರಿಯುತ, ಪಾರದರ್ಶಕ ಹಾಗೂ ದಕ್ಷ ಆಡಳಿತ ನೀಡಲು ತಂಡಸ್ಫೂರ್ತಿಯಿಂದ ಕಾರ್ಯನಿರ್ವಹಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಅಧಿಕಾರಿಗಳಿಗೆ ತಿಳಿಸಿದರು.
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಆಡಳಿತ ಒಂದು ನಿರಂತರ ಪ್ರಕ್ರಿಯೆ. ಅದು ಎಂತಹ ಪರಿಸ್ಥಿತಿಯಲ್ಲೂ ಅನಿರ್ಬಂಧಿತವಾಗಿ ಕಾರ್ಯನಿರ್ವಹಿಸಬೇಕು. ರಾಜ್ಯದ ಜನತೆಗೆ ದಕ್ಷ, ಪ್ರಾಮಾಣಿಕ ಹಾಗೂ ಜನಪರ ಆಡಳಿತ ಕೊಡುವ ದಿಟ್ಟ ತೀರ್ಮಾನ ಕೈಗೊಂಡಿದ್ದೇನೆ. ಇದನ್ನು ಅನುಷ್ಠಾನ ಮಾಡುವುದು ಎಷ್ಟು ಕಷ್ಟ ಎಂಬುದನ್ನು ಅರಿತೇ ಈ ಮಾತನ್ನಾಡುತ್ತಿದ್ದೇನೆ ಎಂದು ತಿಳಿಸಿದರು.
ಪ್ರಗತಿಪರ, ಪರಿಣಾಮಕಾರಿ ಆಡಳಿತ ಕೊಟ್ಟ ಹೆಗ್ಗಳಿಕೆ ನಮ್ಮ ರಾಜ್ಯದ್ದು. ಬದಲಾದ ಪರಿಸ್ಥಿತಿಯಲ್ಲಿ ನಾವು ಇನ್ನಷ್ಟು ದಕ್ಷತೆಯಿಂದ ಕೆಲಸ ಮಾಡಬೇಕಾಗಿದೆ. ಸಚಿವ ಸಂಪುಟದ ನಿರ್ಣಯಗಳು ಕಾಲಮಿತಿಯಲ್ಲಿ ಅನುಷ್ಠಾನಗೊಳ್ಳಬೇಕು. ವಿಳಂಬವಾದಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವಾಗುತ್ತದೆ. ಆಡಳಿತದಲ್ಲಿ ವಿಳಂಬ ಧೋರಣೆ ಕ್ಯಾನ್ಸರ್ ಇದ್ದಂತೆ. ಆದ್ದರಿಂದ ಸರ್ಕಾರದ ನಿರ್ಣಯಗಳು ನಿಗದಿತ ಕಾಲಮಿತಿಯಲ್ಲಿ ಕಾರ್ಯರೂಪಕ್ಕೆ ಬರಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಎಲ್ಲ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಕಾರ್ಯಚಟುವಟಿಕೆಗಳು, ನೀತಿ, ನಿಯಮಾವಳಿಗಳು, ಮಾರ್ಗಸೂಚಿಗಳ ಬಗ್ಗೆ ಸ್ಪಷ್ಟತೆಯನ್ನು ಹೊಂದಿದ್ದು ಕಾರ್ಯನಿರ್ವಹಿಸಬೇಕು. ಒಳ್ಳೆಯ ಕೆಲಸಗಳನ್ನು ಯಾವುದೇ ಹಿಂಜರಿಕೆಯಿಲ್ಲದೆ ಧೈರ್ಯದಿಂದ ಮಾಡಿ. ನನ್ನ ಸರ್ಕಾರ ನಿಮ್ಮೊಂದಿಗೆ ಇರುತ್ತದೆ ಎಂದು ತಿಳಿಸಿದರು.
ಪ್ರಸ್ತುತ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸುವುದು ಹಾಗೂ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆ ನಮ್ಮ ಆದ್ಯತೆಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿ ಇಲಾಖೆಯಲ್ಲಿ ವರ್ಷಾಂತ್ಯದ ವೇಳೆಗೆ ಶೇ. 5 ರಷ್ಟು ಅನಗತ್ಯ ವೆಚ್ಚಗಳನ್ನು ಕಡಿತಗೊಳಿಸಬೇಕು. ಈ ಕುರಿತು ಮಾರ್ಗಸೂಚಿಗಳನ್ನು ಹೊರಡಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು.
ನಿಗದಿತ ಕಾಲಮಿತಿಯಲ್ಲಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ತಂಡ ಸ್ಫೂರ್ತಿಯಿಂದ ಕೆಲಸ ಮಾಡಬೇಕು. ಜೊತೆಗೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಈ ಕುರಿತು ಮತ್ತೊಮ್ಮೆ ವಿವರವಾಗಿ ಚರ್ಚಿಸಿ, ಗೊಂದಲ ನಿವಾರಣೆಗೆ ಮಾರ್ಗಸೂಚಿಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.
ಇಲಾಖೆಗಳ ಕಾರ್ಯನಿರ್ವಹಣೆಗೆ ಶ್ರೇಯಾಂಕ ನೀಡುವ ಮೂಲಕ ದಕ್ಷತೆಯಿಂದ ಕಾರ್ಯನಿರ್ವಹಿಸುವ ಇಲಾಖೆಗಳಿಗೆ ಉತ್ತೇಜನ ನೀಡಲಾಗುವುದು ಎಂದರು.
ಸಭೆಯಲ್ಲಿ ಮಾತನಾಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಮುಖ್ಯಮಂತ್ರಿಯವರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. (kpc)

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
