


ಉತ್ತರ ಕನ್ನಡದಲ್ಲಿ ಮಳೆ ಜೋರಾಗಿದ್ದು, ಕಾರವಾರ ನಗರ ಸೇರಿದಂತೆ ತಾಲೂಕಿನ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಹವಾಮಾನ ಇಲಾಖೆಯು ಇನ್ನೂ ನಾಲ್ಕೈದು ದಿನ ಭಾರಿ ಮಳೆ ಸುರಿಯುವ ಮುನ್ನೆಚ್ಚರಿಕೆ ನೀಡಿದೆ.
ಕಾರವಾರ: ಕರಾವಳಿ ಜಿಲ್ಲೆ ಉತ್ತರಕನ್ನಡದಲ್ಲಿ ವರುಣಾರ್ಭಟ ಜೋರಾಗಿದೆ. ಐದು ದಿನಗಳ ಕಾಲ ರೆಡ್ ಹಾಗೂ ಆರೆಂಜ್ ಅಲರ್ಟ್ ನೀಡಲಾಗಿದ್ದ ಬೆನ್ನಲ್ಲೇ ಜಿಲ್ಲಾದ್ಯಂತ ಧಾರಾಕಾರ ಮಳೆಯಾಗಿದ್ದು, ಸಾಕಷ್ಟು ಅವಾಂತರ ಸೃಷ್ಟಿಸಿದೆ. ಕಾರವಾರ ನಗರದಲ್ಲಿ ಮಳೆಯ ಅಬ್ಬರಕ್ಕೆ ಜನವಸತಿ ಪ್ರದೇಶಗಳ ನಿವಾಸಿಗಳು ಪರದಾಡುವಂತಾಗಿದೆ.
ಕಾರವಾರದ ಹಬ್ಬುವಾಡ, ಸೋನಾರವಾಡ, ಹೈಚರ್ಚ್ ರಸ್ತೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ನೀರು ನದಿಯಂತೆ ಹರಿದು ಬಂದಿದ್ದು ರಸ್ತೆಗಳು ಜಲಾವೃತಗೊಂಡಿದ್ದವು. ಮಳೆಯ ನೀರು ಕಾಲುವೆಗಳಲ್ಲಿ ಸರಾಗವಾಗಿ ಹರಿದು ಹೋಗಲು ಸಾಧ್ಯವಾಗದ ಹಿನ್ನಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ಸಂಗ್ರಹವಾಗಿದ್ದು ರಸ್ತೆಗಳಲ್ಲಿ ಸಂಚರಿಸಲು ವಾಹನ ಸವಾರರು ಪರದಾಡುವಂತಾಯಿತು. ಮಳೆಗಾಲಕ್ಕೆ ಮುನ್ನ ನಗರಸಭೆ ವತಿಯಿಂದ ಕಾಲುವೆಗಳನ್ನು ಸ್ವಚ್ಛಗೊಳಿಸದಿರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜನಸಾಮಾನ್ಯರು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿಶಾಪ ಹಾಕಿದ್ದಾರೆ.
ಉತ್ತರ ಕನ್ನಡದಲ್ಲಿ ಭಾರಿ ಮಳೆ
ಜಿಲ್ಲೆಯಲ್ಲಿ ಜೂನ್ 21ರಿಂದ 25ರವರೆಗೆ ಭಾರಿ ಮಳೆ ಸುರಿಯುವ ಮುನ್ಸೂಚನೆ ನೀಡಿದ್ದ ಹವಾಮಾನ ಇಲಾಖೆ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಿಸಿದೆ. ಸತತ ಮಳೆಯಿಂದ ಕಾರವಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಅರಗಾ, ಚೆಂಡಿಯಾ ಗ್ರಾಮಗಳಲ್ಲಿ ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿತ್ತು. ಹೆದ್ದಾರಿ ಅಗಲೀಕರಣ ಕಾರ್ಯ ಕೈಗೊಂಡಿರುವ ಐಆರ್ಬಿ ನಿರ್ಲಕ್ಷ್ಯದಿಂದ ಮಳೆಯ ನೀರು ಸರಾಗವಾಗಿ ಹರಿದು ಹೋಗುತ್ತಿಲ್ಲ. ಜೊತೆಗೆ ನೌಕಾನೆಲೆಯಿಂದ ನೀರು ಸಮುದ್ರಕ್ಕೆ ಸೇರಲು ಅಡ್ಡಿಯಾಗಿದೆ ಅಂತಾ ಅಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. (etbk)
