

ಸುಸಜ್ಜಿತ ಆಸ್ಪತ್ರೆಗಾಗಿ ಟ್ವಿಟರ್ ಅಭಿಯಾನ ಕೈಗೊಂಡ ಉತ್ತರ ಕನ್ನಡ ಜನತೆ
“ಉತ್ತರ ಕನ್ನಡ” ಜಿಲ್ಲೆಗೆ ನೂತನ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಟ್ವೀಟರ್ ಅಭಿಯಾನಕ್ಕೆ ಕೈಜೋಡಿಸಿದ ಸಿದ್ದರಾಮಯ್ಯ.!

ಬೆಂಗಳೂರು: ಸುಸಜ್ಜಿತ ತುರ್ತು ಚಿಕಿತ್ಸಾ ಆಸ್ಪತ್ರೆಗಾಗಿ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ಹಾಗೂ ಟ್ವೀಟರ್ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಅಹವಾಲನ್ನು ಮುಕ್ತ ಮನಸಿನಿಂದ ಆಲಿಸಿ, ಹೈಟೆಕ್ ಆಸ್ಪತ್ರೆ ನಿರ್ಮಿಸಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಸುಸಜ್ಜಿತ ಆಸ್ಪತ್ರೆಗಾಗಿ ಇಂದು ಟ್ವಿಟರ್ ಅಭಿಯಾನ- ಉತ್ತರ ಕನ್ನಡ ಜಿಲ್ಲೆಯ ಜನರಿಂದ ಹೋರಾಟಕ್ಕೆ ಮುನ್ನುಡಿ- ಸಂಜೆ 5 ಗಂಟೆಗೆ ಏಕಕಾಲಕ್ಕೆ ಒಟ್ಟಾಗಿ WeNeedEmergencyHospitalInUttarakannada ಅಭಿಯಾನ ಶುರು
ಕಾರವಾರ(ಉತ್ತರ ಕನ್ನಡ): ಹಲವು ಪ್ರವಾಸಿ ತಾಣಗಳನ್ನು ಹೊಂದಿರುವ ಜಿಲ್ಲೆಯಲ್ಲಿ ಅವಘಡಗಳು ಸಂಭವಿಸುತ್ತಿರುತ್ತವೆ. ಆದರೆ ಇಲ್ಲಿ ತುರ್ತು ಚಿಕಿತ್ಸಾ ಆಸ್ಪತ್ರೆ ಇಲ್ಲ. ಈ ನಿಟ್ಟಿನಲ್ಲಿ ಇದೀಗ ಮತ್ತೆ ಜಿಲ್ಲೆಯ ಜನತೆ ಒಟ್ಟಾಗಿ ಸುಸಜ್ಜಿತ ಆಸ್ಪತ್ರೆಗಾಗಿ ವಿಭಿನ್ನ ಅಭಿಯಾನದ ಮೂಲಕ ಹೋರಾಟಕ್ಕೆ ಇಳಿಯಲು ಮುಂದಾಗಿದ್ದಾರೆ.
ಜಿಲ್ಲೆಗೆ ಬರುವ ಪ್ರವಾಸಿಗರಿಗೆ, ಜಿಲ್ಲೆಯ ಜನತೆ ‘ದಯವಿಟ್ಟು ಯಾವುದೇ ಅಪಘಾತಗಳನ್ನು ಮಾಡಿಕೊಳ್ಳಬೇಡಿ, ಚಿಕಿತ್ಸೆ ಪಡೆದುಕೊಳ್ಳಲು ನಮ್ಮಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲ’ ಎಂದು ಮನವಿ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ಸಂದೇಶ ಹರಿದಾಡುತ್ತಿದೆ.
ಸುಸಜ್ಜಿತ ಆಸ್ಪತ್ರೆಗಾಗಿ ಟ್ವಿಟರ್ ಅಭಿಯಾನ ಕೈಗೊಳ್ಳಲಿರುವ ಉತ್ತರ ಕನ್ನಡ ಜನತೆ
ಇಷ್ಟು ದೊಡ್ಡ ಜಿಲ್ಲೆಯ ಯಾವುದೇ ತಾಲೂಕಿನಲ್ಲೂ ತುರ್ತು ಚಿಕಿತ್ಸೆ ನೀಡುವ ಒಂದೇ ಒಂದು ಸುಸಜ್ಜಿತ ಆಸ್ಪತ್ರೆ ಇಲ್ಲ. ತುರ್ತು ಅನಾರೋಗ್ಯದ ಪರಿಸ್ಥಿತಿಯಲ್ಲಿ ದೇವರ ಮೇಲೆ ಭಾರ ಹಾಕಿ ನೆರೆಯ ಜಿಲ್ಲೆಯ ಆಸ್ಪತ್ರೆಗಳಿಗೆ ಆ್ಯಂಬುಲೆನ್ಸ್ ಏರಿ ಹೋಗಬೇಕಾದ ಅನಿವಾರ್ಯತೆಯನ್ನು ಜಿಲ್ಲೆಯ ಜನತೆ ಎದುರಿಸುತ್ತಿದ್ದಾರೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಜನರು ಎಮರ್ಜೆನ್ಸಿ/ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವಂತೆ ಜಿಲ್ಲೆಯ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಷ್ಟು ದಿನ ಜನ ಪ್ರತಿನಿಧಿಗಳಿಗೆ ಮನವಿ ಮಾಡಿ ಬೇಸತ್ತಿರುವ ಜನರು ಇದೀಗ ಹೋರಾಟದ ಹಾದಿ ತುಳಿಯಲು ಮುಂದಾಗಿದ್ದಾರೆ. ಇಂದು ಟ್ವಿಟರ್ ಅಭಿಯಾನದ ಮೂಲಕ ಹೋರಾಟಕ್ಕೆ ಮುನ್ನುಡಿಯಿಡುತ್ತಿದ್ದಾರೆ. ಜಿಲ್ಲೆಯ ಜನರು ಸಂಜೆ 5 ಗಂಟೆಗೆ ಏಕಕಾಲಕ್ಕೆ ಒಟ್ಟಾಗಿ WeNeedEmergencyHospitalInUttarakannada ಎನ್ನುವ ಹ್ಯಾಷ್ಟ್ಯಾಗ್ನೊಂದಿಗೆ ಪ್ರಧಾನಿ ನರೇಂದ್ರಮೋದಿ, ಅಮಿತ್ ಶಾ, ಸಿಎಂ ಬೊಮ್ಮಾಯಿ ಸೇರಿದಂತೆ ಪ್ರಮುಖರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಲು ನಿರ್ಧರಿಸಿದ್ದಾರೆ. ಜೊತೆಗೆ NoHospitalNoVote ಎನ್ನುವ ಹ್ಯಾಷ್ಟ್ಯಾಗ್ ಸಹ ಬಳಸಲಿದ್ದು, ಆಸ್ಪತ್ರೆ ನಿರ್ಮಿಸದಿದ್ರೆ ಮತದಾನ ಬಹಿಷ್ಕರಿಸುವ ಎಚ್ಚರಿಕೆಯನ್ನು ರವಾನಿಸಿದ್ದಾರೆ.
ಕಾರವಾರದ ಕೆಲವರು ಒಟ್ಟಾಗಿ ಸುಸಜ್ಜಿತ ಆಸ್ಪತ್ರೆಗಾಗಿ ರಕ್ತದ ಮೂಲಕ ಪ್ರಧಾನಿಗೆ ಪತ್ರ ಬರೆಯಲು ನಿರ್ಧರಿಸಿದ್ದಾರೆ. ಅಗಸ್ಟ್ 15ರೊಳಗೆ ಉತ್ತರಕನ್ನಡಕ್ಕೆ ತುರ್ತು ಚಿಕಿತ್ಸಾ ಆಸ್ಪತ್ರೆಯನ್ನು ಘೋಷಿಸುವಂತೆ ಸರ್ಕಾರಕ್ಕೆ ಆಗ್ರಹಿಸಲಿದ್ದಾರೆ. ಒಟ್ಟಾರೆ ಆಸ್ಪತ್ರೆಗಾಗಿ ಜಿಲ್ಲೆಯಾದ್ಯಂತ ಹೋರಾಟ ರೂಪುಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಇದು ಯಾವ ಸ್ವರೂಪ ಪಡೆದುಕೊಳ್ಳಲಿದೆ ಅನ್ನೋದನ್ನು ಕಾದುನೋಡಬೇಕು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
