

ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಮೇಲೆ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಅವರ ಅಸಮಾಧಾನಕ್ಕೆ ಕಾರಣ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಿರುವುದು.


ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಮೇಲೆ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಅವರ ಅಸಮಾಧಾನಕ್ಕೆ ಕಾರಣ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಿರುವುದು.
ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವ ಬಿ ಕೆ ಹರಿಪ್ರಸಾದ್ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತಿ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶ ಆಯೋಜಿಸಿದ್ದರು. ಅದರಲ್ಲಿ ಮಾತನಾಡಿ, ನನ್ನನ್ನು ಮಂತ್ರಿ ಮಾಡದಿದ್ದಕ್ಕೆ ರಾಜ್ಯದ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳುತ್ತೇನೆ ಎಂದು ವ್ಯಂಗ್ಯವಾಗಿ ತಮ್ಮ ಅಸಮಾಧಾನ, ಬೇಸರ, ಸಿಟ್ಟನ್ನು ಹೊರಹಾಕಿದರು.


ದೇವರಾಜ ಅರಸು ಕಾರಿನಲ್ಲಿ ಕುಳಿತರೆ ದೇವರಾಜ ಅರಸು ಆಗಲ್ಲ: ಹಿಂದಿನ ಯಾವ ಮುಖ್ಯಮಂತ್ರಿಗಳೂ ಜಾತಿ ರಾಜಕಾರಣ ಮಾಡಲಿಲ್ಲ. ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಜಾತಿ ರಾಜಕಾರಣ ಮಾಡಲಿಲ್ಲ. ಪಂಚೆ ಹಾಕಿಕೊಂಡು ವಾಚ್ ಕಟ್ಟಿಕೊಂಡು ಖಾಕಿ ಚಡ್ಡಿ ಹಾಕೊಂಡು, ಸಮಾಜವಾದಿ ಅಂತಾ ಹೇಳಿದರೆ ಆಗುವುದಿಲ್ಲ. ನಾನು ಮೂರು ಬಾರಿ ಸೋತಿರಬಹುದು, ಆದರೆ ಇನ್ನೂ ಸತ್ತಿಲ್ಲ. ಸೈಟು ಕಳ್ಳತನ ಮಾಡಿ ಮಾರುವವನು ನನ್ನ ಬಗ್ಗೆ ಮಾತನಾಡುತ್ತಾನೆ. ಆದರೆ ಸ್ವಾಭಿಮಾನ ಬಿಟ್ಟು ಸಹನೆ ಕಳೆದುಕೊಂಡವನಲ್ಲ ನಾನು. ದೇವರಾಜ ಅರಸು ಕಾರಿನಲ್ಲಿ ಕುಳಿತರೆ ದೇವರಾಜ ಅರಸು ಆಗಲ್ಲ. ದೇವರಾಜ ಅರಸು ಚಿಂತನೆ ಇರಬೇಕು ಎಂದು ಸಹ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ನಾನು ಮಂತ್ರಿ ಆಗಿದ್ದರೆ ಸಮುದಾಯದ ಜನರ ಜೊತೆಗೆ ಇರಲು ಸಾಧ್ಯವಾಗುತ್ತಿರಲ್ಲಿ. ನಾನು ಮುಖ್ಯಮಂತ್ರಿ ಅಥವಾ ಮಂತ್ರಿ ಆಗುತ್ತೇನೆ ಅಂತ ಸಮುದಾಯದ ಯಾರೂ ಭ್ರಮೆಯಲ್ಲಿ ಇರಬೇಡಿ. ಈಡಿಗ, ಬಿಲ್ಲವ, ನಾಮಧಾರಿ ಸಮುದಾಯದವರು ಕೇವಲ ರಾಜ್ಯದಲ್ಲಿ ಮಾತ್ರ ಅಲ್ಲ, ಎಲ್ಲ ರಾಜ್ಯಗಳಲ್ಲೂ ಇದ್ದಾರೆ. ದೇವರಾಜ ಅರಸು ಅವರ ಬಗ್ಗೆ ಭಾಷಣದಲ್ಲಿ ಪುಂಕಾನುಪುಂಕವಾಗಿ ಹಾಡಿ ಹೊಗಳುವ ನಾವು ಅವರ ಮೊಮ್ಮಗನಿಗೆ ಯಾವ ಅಧಿಕಾರವನ್ನೂ ಕೊಟ್ಟಿಲ್ಲ ಅಂತ ಅವಮಾನ ಆಗುತ್ತಿದೆ ಎಂದರು.
ನಮ್ಮ ಸಮುದಾಯ ಅತಂತ್ರವಾಗಿದೆ. ಇದು ಅತಂತ್ರ ಸಮುದಾಯದ ವೇದಿಕೆ. ಚುನಾವಣೆ ಬರುವಾಗ ಘೋಷಣೆ ಮಾಡಿದ್ದೇ ಮಾಡಿದ್ದು. ಅಧಿಕಾರಕ್ಕೆ ಬರಲು ಏನೇನೋ ಭರವಸೆ ನೀಡಿದರು. ಆದರೆ ಅಧಿಕಾರಕ್ಕೆ ಬಂದ ಮೇಲೆ ಅತೀ ಹಿಂದುಳಿದ ವರ್ಗಗಳು ನೆನಪೇ ಆಗಿಲ್ಲ. ಅಧಿಕಾರ ಸಿಕ್ಕ ತಕ್ಷಣವೇ ಸಮುದಾಯಕ್ಕೆ ಕೊಡಬೇಕಾಗಿರುವುದು ಇನ್ನೂ ಸಿಕ್ಕಿಲ್ಲ. ಸಮುದಾಯದ ಶಕ್ತಿ ಏನೂ ಎನ್ನುವುದನ್ನು ನಾವೇ ಇನ್ನೂ ತಿಳಿದುಕೊಂಡಿಲ್ಲ ಎಂದು ಸಹ ಅಸಹನೆ ಹೊರಹಾಕಿದರು.
ಅರ್ಹತೆ ಇದ್ದರೂ ಪರಮೇಶ್ವರ್ ಅವರನ್ನು ಸಿಎಂ ಮಾಡಲಿಲ್ಲ: ಡಾ ಜಿ ಪರಮೇಶ್ವರ್ ಅವರನ್ನು ಸಿಎಂ ಇರಲಿ ಡಿಸಿಎಂ ಸ್ಥಾನದಿಂದಲೂ ಡಿಪ್ರಮೋಟ್ ಮಾಡಲಾಯಿತು. ಅತಿ ಹೆಚ್ಚು ಅವಧಿಗೆ ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಅವರಿಗೆ ಸಿಎಂ ಆಗಲು ಎಲ್ಲಾ ಅರ್ಹತೆಗಳಿದ್ದವು. ಆದರೆ ಅವರನ್ನು ಮಾಡಲಿಲ್ಲ. ಈಗಲೂ ಸರ್ಕಾರದಲ್ಲಿ ದಲಿತರನ್ನು ಉಪಮುಖ್ಯಮಂತ್ರಿ ಮಾಡಬಹುದಿತ್ತು. ಸತೀಶ್ ಜಾರಕಿಹೊಳಿಯನ್ನು ಮಾಡಬಹುದಿತ್ತು, ಆದರೆ ಮಾಡಿಲ್ಲ ಎಂದರು.
ಪ್ರತಿಕ್ರಿಯೆ ಕೊಡಲ್ಲ: ಬಿ ಕೆ ಹರಿಪ್ರಸಾದ್ ಅವರ ಟೀಕೆಯ ಬಗ್ಗೆ ಕೇಳಿದಾಗ ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಹರಿಪ್ರಸಾದ್ ನನ್ನ ಹೆಸರು ಹೇಳಿದ್ದಾರಾ, ಹೀಗಾಗಿ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.
ಬಿ ಕೆ ಹರಿಪ್ರಸಾದ್ ಅವರ ಹೇಳಿಕೆಗೆ ಅಭಿನಂದನೆ ಸಲ್ಲಿಸುತ್ತೇನೆ, ನನ್ನ ಮೇಲೆ ಅಭಿಮಾನದಲ್ಲಿ ಅವರು ಹೀಗೆ ಹೇಳಿದ್ದಾರೆ. ಅಂತಿಮವಾಗಿ ಸಿಎಂ, ಡಿಸಿಎಂನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಪಾವಗಡದಲ್ಲಿ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






