


ಉದ್ಯಮಿ ಕೊಲೆ ಕೇಸ್: ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ- ಕೋರ್ಟ್
ಉದ್ಯಮಿ ಆರ್.ಎನ್.ನಾಯಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋಕಾ ನ್ಯಾಯಾಲಯ ಇಂದು ಮಹತ್ವದ ತೀರ್ಪು ನೀಡಿದೆ.

ಬೆಳಗಾವಿ: ಅಂಕೋಲಾ ಮೂಲದ ಉದ್ಯಮಿ ಆರ್.ಎನ್.ನಾಯಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಕಾ ನ್ಯಾಯಾಲಯ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಜನ ಆರೋಪಿಗಳನ್ನು ‘ದೋಷಿ’ ಎಂದು ಆದೇಶ ನೀಡಿದೆ. ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿ ನ್ಯಾಯಾಧೀಶ ಸಿ.ಎಂ. ಜೋಶಿ ಮಹತ್ವದ ಆದೇಶ ಪ್ರಕಟಿಸಿದ್ದಾರೆ. ಏಪ್ರಿಲ್ 4ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ನ್ಯಾಯಾಧೀಶರು ತಿಳಿಸಿದ್ದಾರೆ.
ಮೂವರು ನಿರ್ದೋಷಿಗಳು: ಪ್ರಕರಣದ 6, 11 ಹಾಗೂ 16ನೇ ಆರೋಪಿಗಳನ್ನು ‘ನಿರ್ದೋಷಿ’ ಎಂದು ನ್ಯಾಯಾಲಯ ಹೇಳಿದೆ. ಹೀಗಾಗಿ ಆರನೇ ಆರೋಪಿ ಕೇರಳದ ರಬ್ದಿನ್ ಫಿಚೈ, 11ನೇ ಆರೋಪಿ ಬೆಂಗಳೂರಿನ ಮಹ್ಮದ್ ಶಾಬಂದರಿ ಹಾಗೂ 16ನೇ ಆರೋಪಿ ಉತ್ತರ ಕನ್ನಡದ ಆನಂದ ರಮೇಶ್ ನಾಯಕ್ ಈ ಪ್ರಕರಣದಲ್ಲಿ ದೋಷಮುಕ್ತರಾಗಿದ್ದಾರೆ.


ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ
ದೋಷಿಗಳು ಯಾರು?: ಉಳಿದಂತೆ, ಎರಡನೇ ಆರೋಪಿ ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, ಮೂರನೇ ಆರೋಪಿ ಬೆಂಗಳೂರಿನ ಅಭಿ ಭಂಡಗಾರ, ನಾಲ್ಕನೇ ಆರೋಪಿ ಉಡುಪಿಯ ಗಣೇಶ ಭಜಂತ್ರಿ, ಐದನೇ ಆರೋಪಿ ಕೇರಳದ ಕೆ.ಎಂ.ಇಸ್ಮಾಯಿಲ್, ಏಳನೇ ಆರೋಪಿ ಹಾಸನದ ಮಹೇಶ ಅಚ್ಛಂಗಿ, ಎಂಟನೇ ಆರೋಪಿ ಕೇರಳದ ಸಂತೋಷ ಎಂ.ಬಿ, ಒಂಬತ್ತನೇ ಆರೋಪಿ ಉಡುಪಿ ಮೂಲದ ಬನ್ನಂಜೆ ರಾಜಾ, ಹತ್ತನೇ ಆರೋಪಿ ಬೆಂಗಳೂರಿನ ಜಗದೀಶ್ ಚಂದ್ರರಾಜ್, 12 ಆರೋಪಿ ಉತ್ತರ ಪ್ರದೇಶದ ಅಂಕಿತಕುಮಾರ್ ಕಶ್ಯಪ್ ದೋಷಿಗಳೆಂದು ಕೋರ್ಟ್ ತೀರ್ಪಿನಲ್ಲಿ ಹೇಳಿದೆ.
ಪ್ರಕರಣದ ಸಂಕ್ಷಿಪ್ತ ವಿವರ: 2013ರ ಡಿಸೆಂಬರ್ 21ರಂದು ಅಂಕೋಲಾದಲ್ಲಿ ನಡೆದ ಆರ್.ಎನ್.ನಾಯಕ್ ಕೊಲೆ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕೇಸ್ ದಾಖಲಿಸಲಾಗಿತ್ತು. ಇದು ರಾಜ್ಯದ ಮೊದಲ ಕೋಕಾ ಪ್ರಕರಣವಾಗಿತ್ತು. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಕೆ.ಜಿ.ಪುರಾಣಿಕಮಠ ಹಾಗೂ ಹೆಚ್ಚುವರಿ ಅಭಿಯೋಜಕ ಶಿವಪ್ರಸಾದ್ ಆಲ್ವಾ ವಕಾಲತ್ತು ವಹಿಸಿದ್ದರು. (ಈಟಿಬಿಕೆ)



_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






