

ಕಳೆದ ರಾತ್ರಿ ಬೆಂಗಳೂರಿನ ಡಾಲರ್ಸ್ ಕಾಲೊನಿಯ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿರುವ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ಇಂದು ಬುಧವಾರ ಅವರ ಸ್ವಗ್ರಾಮ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನಡೆಯಲಿದೆ.


ಬೆಂಗಳೂರು/ಬೆಳಗಾವಿ: ಕಳೆದ ರಾತ್ರಿ ಬೆಂಗಳೂರಿನ ಡಾಲರ್ಸ್ ಕಾಲೊನಿಯ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿರುವ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ಇಂದು ಬುಧವಾರ ಅವರ ಸ್ವಗ್ರಾಮ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನಡೆಯಲಿದೆ.

ಒಂದು ದಿನ ಶೋಕಾಚರಣೆ
ಸಕಲ ಸರ್ಕಾರಿ ಗೌರವಗಳೊಂದಿಗೆ ಸಚಿವ ಉಮೇಶ್ ಕತ್ತಿಯವರ ಅಂತ್ಯಕ್ರಿಯೆ ನಡೆಯಲಿದ್ದು ಅವರ ನಿಧನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಂದು ದಿನದ ಶೋಕಾಚರಣೆಯನ್ನು ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಪಾರ್ಥೀವ ಶರೀರ ಇಂದು ಬೆಳಗ್ಗೆ 10 ಗಂಟೆಗೆ ಅವರ ಹುಟ್ಟೂರು ಬೆಳಗಾವಿ ಜಿಲ್ಲೆಯ ಬೆಲ್ಲದ ಬಾಗೇವಾಡಿಗೆ ರವಾನೆಯಾಗಬೇಕಿತ್ತಾದರೂ, ಚೆನೈನಿಂದ ಬರಬೇಕಿದ್ದ ವಿಶೇಷ ವಿಮಾನ ಬೆಂಗಳೂರು ತಲುಪುವುದು ತಡವಾಗಿದ್ದರಿಂದ ದೇಹವಿನ್ನೂ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿದೆ. ಪ್ರತಿಕೂಲ ಹವಾಮಾನದ ಕಾರಣ ವಿಮಾನ ಆಗಮಿಸುವುದು ವಿಳಂಬವಾಗುತ್ತಿದೆ ಎನ್ನಲಾಗಿದೆ.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕನಸುಗಾರ ಉಮೇಶ್ ಕತ್ತಿ: ಅರ್ಧಕ್ಕೆ ನಿಂತ ಅವಿರತ ಹೋರಾಟ; ಸ್ಪರ್ಧಿಸಿದ್ದ 9 ಚುನಾವಣೆಗಳಲ್ಲಿ 8 ಬಾರಿ ಗೆಲುವು! https://t.co/3uda9esXDN via @KannadaPrabha @XpressBengaluru @BJP4Karnataka @naushadbijapur— kannadaprabha (@KannadaPrabha) September 7, 2022
ಶಾಲಾ-ಕಾಲೇಜುಗಳಿಗೆ ರಜೆ
ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಬೆಳಗಾವಿಗೆ ಸಿಎಂ, ಸಂಜೆ ಅಂತ್ಯಕ್ರಿಯೆಯಲ್ಲಿ ಭಾಗಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಂಪುಟ ಸಹೋದ್ಯೋಗಿಗಳು ಬೆಳಗಾವಿಗೆ ಇಂದು ತೆರಳಲಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಈಗಾಗಲೇ ಬೆಳಗಾವಿಗೆ ಹೊರಟಿದ್ದಾರೆ. ಉಮೇಶ್ ಕತ್ತಿಯವರಿಗೆ ಹೃದಯಾಘಾತವಾಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ ಎಂದು ನಿನ್ನೆ ರಾತ್ರಿ ಗೊತ್ತಾದ ಕೂಡಲೇ ಬೆಂಗಳೂರು ಮಳೆಯ ಹಿನ್ನೆಲೆಯಲ್ಲಿ ನೈಟ್ ರೌಂಡ್ಸ್ ಮಾಡುತ್ತಿದ್ದ ಸಿಎಂ ಎಲ್ಲಾ ಕೆಲಸ ಕಾರ್ಯಗಳನ್ನು ಅರ್ಧಕ್ಕೆ ನಿಲ್ಲಿಸಿ ಆಸ್ಪತ್ರೆಗೆ ಧಾವಿಸಿದರು.
ಕತ್ತಿಯವರ ಅಂತ್ಯಕ್ರಿಯೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ಯಡಿಯೂರಪ್ಪನವರು ಶಿವಮೊಗ್ಗದಿಂದ ಬೆಳಗಾವಿಯತ್ತ ಹೊರಟಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಷ್ಟೇ ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಉಮೇಶ್ ಕತ್ತಿಯವರ ಅಂತಿಮ ದರ್ಶನ ಪಡೆದರು. ಬಳಿಕ ಮಾತನಾಡಿದ ಅವರು, ನಾನು ಮತ್ತು ಸಚಿವ ಉಮೇಶ್ ಕತ್ತಿ ಸ್ನೇಹಿತರು, ನೇರ ನಡೆ ನುಡಿಯ ಉಮೇಶ್ ಕತ್ತಿ ಮಾತಿನಲ್ಲಿ ಕಠೋರವಾದರೂ ಮನಸ್ಸಿನಲ್ಲಿ ಒಳ್ಳೆಯವರು, ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ನಾನೂ ಬೆಳಗಾವಿಗೆ ಹೋಗುತ್ತೇನೆ ಎಂದರು.
ಉಮೇಶ್ ಕತ್ತಿ ವಿಧಿವಶ ಹಿನ್ನೆಲೆ ಸಿದ್ದರಾಮಯ್ಯನವರ ಇಂದಿನ ಕನ್ಯಾಕುಮಾರಿ ಪ್ರವಾಸ ರದ್ದು ಗೊಳಿಸಲಾಗಿದೆ. ಕತ್ತಿ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮಧ್ಯಾಹ್ನ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ.
ರಾಜಕೀಯ ಗಣ್ಯರು ಹೆಚ್ಎಎಲ್ ಏರ್ಪೋರ್ಟ್ ನಲ್ಲಿ ಉಮೇಶ್ ಕತ್ತಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೃಷಿ ಸಚಿವ ಬಿಸಿ. ಪಾಟೀಲ್, ಸಚಿವ ಭೈರತಿ ಬಸವರಾಜ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಕೆಜೆ ಜಾರ್ಜ್, ಎಮ್.ಟಿ.ಬಿ. ನಾಗರಾಜ್ ಸೇರಿದಂತೆ ಅನೇಕರು ಅಂತಿಮ ದರ್ಶನ ಪಡೆದರು.
ಅಂತ್ಯಕ್ರಿಯೆಗೆ ಸಿದ್ಧತೆ
ಬೆಲ್ಲದ ಬಾಗೇವಾಡಿ ಹೊರವಲಯದಲ್ಲಿರುವ ವಿಶ್ವರಾಜ್ ಸಕ್ಕರೆ ಕಾರ್ಖಾನೆಯಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿದ್ದು, ಮಧ್ಯಾಹ್ನ 3.30ರವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇನ್ನು ಕೆಲವೇ ಹೊತ್ತಿನಲ್ಲಿ ಹೆಚ್ ಎಎಲ್ ವಿಮಾನ ನಿಲ್ದಾಣ ಮೂಲಕ ಮೃತದೇಹವನ್ನು ವಿಶೇಷ ವಿಮಾನದಲ್ಲಿ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಪಾರ್ಥಿವ ಶರೀರವನ್ನು ತರಲಿದ್ದಾರೆ. ಅಲ್ಲಿಂದ ನೇರವಾಗಿ ಬೆಲ್ಲದ ಬಾಗೇವಾಡಿಯಲ್ಲಿರುವ ಕತ್ತಿ ಒಡೆತನದ ಸಕ್ಕರೆ ಕಾರ್ಖಾನೆಗೆ ಮೃತದೇಹ ಶಿಪ್ಟ್ ಮಾಡಲಾಗುತ್ತದೆ. ಅಲ್ಲಿಂದ ಬೆಲ್ಲದ ಬಾಗೇವಾಡಿಯ ಸ್ವಂತ ನಿವಾಸಕ್ಕೆ ಪಾರ್ಥಿವ ಶರೀರ ಸ್ಥಳಾಂತರವಾಗಲಿದ್ದು, ಮನೆಯ ಆವರಣದಲ್ಲಿ ಕುಟುಂಬಸ್ಥರು ಪೂಜೆ ಪುರಸ್ಕಾರ ನೆರವೇರಿಸಲಿದ್ದಾರೆ. ಸಂಜೆ ಐದು ಗಂಟೆಗೆ ಉಮೇಶ್ ಕತ್ತಿ ಅವರ ಜಮೀನಿನಲ್ಲೇ ಅಂತ್ಯಸಂಸ್ಕಾರ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ಬೆಳಗಾವಿಗೆ ಅವರ ಪಾರ್ಥಿವ ಶರೀರ ಬಂದು ತಲುಪಲಿದೆ. ಬೆಳಗ್ಗೆ 10.30ರ ವರೆಗೆ ಶಿವಬಸವನಗರದ ನಿವಾಸದ ಎದುರು ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 10.30ಕ್ಕೆ ಬೆಳಗಾವಿಯಿಂದ ಸಂಕೇಶ್ವರದ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಎದುರು ಅಂತಿಮ ದರ್ಶನ. ಬಳಿಕ 12ಗಂಟೆಗೆ ಸ್ವಗ್ರಾಮ ಬೆಲ್ಲದ ಬಾಗೇವಾಡಿ ಗ್ರಾಮಕ್ಕೆ ಮೃತದೇಹ ರವಾನೆಯಾಗಲಿದೆ. 12ರಿಂದ ಸಂಜೆ ಐದು ಗಂಟೆವರೆಗೂ ಬೆಲ್ಲದ ಬಾಗೇವಾಡಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ. ಸಂಜೆ 5 ಗಂಟೆಗೆ ಉಮೇಶ್ ಕತ್ತಿಯವರ ಜಮೀನಿನಲ್ಲಿ ತಂದೆ ತಾಯಿಯ ಸಮಾಧಿ ಪಕ್ಕದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ತಿಳಿದುಬಂದಿದೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






