![](https://i0.wp.com/samajamukhi.net/wp-content/uploads/2023/12/deshpande.jpg?resize=600%2C450&ssl=1)
![](https://i0.wp.com/samajamukhi.net/wp-content/uploads/2021/08/S-scaled.jpg?fit=2560%2C1810&ssl=1)
ಆಡಳಿತ ಸುಧಾರಣಾ ಆಯೋಗದ ಶಿಫಾರಸುಗಳನ್ನು ತಿಂಗಳೊಳಗೆ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಆರ್.ವಿ.ದೇಶಪಾಂಡೆ ಸೂಚನೆ
ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ 98 ಶಿಫಾರಸುಗಳನ್ನು ಒಂದು ತಿಂಗಳೊಳಗೆ ಸಂಪೂರ್ಣವಾಗಿ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
![ಆರ್.ವಿ.ದೇಶಪಾಂಡೆ](https://i0.wp.com/media.assettype.com/kannadaprabha%2F2024-06%2F6e796dee-899d-45f3-a016-fc43b76dec8b%2FDeshpande.jpg?w=760&ssl=1)
ಆರ್.ವಿ.ದೇಶಪಾಂಡೆ
ಬೆಂಗಳೂರು: ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ 98 ಶಿಫಾರಸುಗಳನ್ನು ಒಂದು ತಿಂಗಳೊಳಗೆ ಸಂಪೂರ್ಣವಾಗಿ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗುರುವಾರ ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ನಾನು ಆಯೋಗದ ಅಧ್ಯಕ್ಷನಾಗಿ ಜನವರಿಯಲ್ಲಿ ಅಧಿಕಾರ ವಹಿಸಿಕೊಂಡಾಗ 99 ಶಿಫಾರಸ್ಸುಗಳು ಮಾತ್ರ ಅನುಷ್ಠಾನಗೊಂಡಿದ್ದು, ಆಯೋಗವು ಈಗಾಗಲೇ ಮಾಡಿದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವ ಕುರಿತು ಹೆಚ್ಚಿನ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ, ಸಚಿವರು, ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಪತ್ರಗಳ ಮೂಲಕ ಕ್ರಮ ಕೈಗೊಳ್ಳಲು ತಿಳಿಸಲಾಗಿತ್ತು ಎಂದು ಹೇಳಿದ್ದಾರೆ.
ಕಳೆದ ತಿಂಗಳಲ್ಲಿನಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಯೊಂದಿಗೆ ಸಭೆ ನಡೆಸಿ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಆಡಳಿತ ಸುಧಾರಣಾ ಆಯೋಗದ ಶಿಫಾರಸ್ಸುಗಳ ಅನುಷ್ಠಾನದ ಬಗ್ಗೆ ಮಾಸಿಕ ಸಭೆಗಳಲ್ಲಿಯೂ ಪರಿಶೀಲಿಸಲು ತಿಳಿಸಲಾಗಿತ್ತು. ಇದರ ಪರಿಣಾಮವಾಗಿ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವಲ್ಲಿ ಗಣನೀಯ ಪ್ರಗತಿ ಕಂಡು ಬಂದಿದೆ ಎಂದು ತಿಳಿಸಿದರು.
![ಆರ್.ವಿ.ದೇಶಪಾಂಡೆ](https://i0.wp.com/media.assettype.com/kannadaprabha%2Fimport%2F2023%2F11%2F26%2Foriginal%2Fvijay-bhaskar.jpg?w=760&ssl=1)
ಆಯೋಗವು 2021ರ ಜೂನ್ನಲ್ಲಿ ಕಂದಾಯ, ಆಹಾರ ಮತ್ತು ನಾಗರಿಕ ಸರಬರಾಜು, ಕಾನೂನು ಮಾಪನ ಶಾಸ್ತ್ರ ಹಾಗೂ ಸಾರಿಗೆ ಇಲಾಖೆಗಳಿಗೆ ಸಂಬಂಧಿಸಿದಂತೆ ಮೊದಲನೆಯ ವರದಿಯಲ್ಲಿ ಕ್ರಮವಾಗಿ 528, 111 ಮತ್ತು 217 ಒಟ್ಟು 856 ಶಿಫಾರಸ್ಸುಗಳನ್ನು ಮಾಡಿದೆ. ಕಳೆದ ಮೂರು ವರ್ಷಗಳಲ್ಲಿ ಈ ಮೂರು ಇಲಾಖೆಗಳ ಶಿಫಾರಸ್ಸುಗಳ ಅನುಷ್ಠಾನ ಕುರಿತು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಲು ಜೂ.18, 19 ಹಾಗೂ 20ರಂದು ಸಂಬಂಧಿಸಿದ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಯೊಂದಿಗೆ ಕೂಲಂಕಷವಾಗಿ ಪರಿಶೀಲಿಸಲಾಗಿದೆ ಎಂದು ಹೇಳಿದರು.
ಕಂದಾಯ ಇಲಾಖೆಗೆ ಸಂಬಂಧಿಸಿದ ಒಟ್ಟು 528 ಶಿಫಾರಸ್ಸುಗಳಲ್ಲಿ 205 ಅನುಷ್ಠಾನಗೊಳಿಸಲಾಗಿದೆ. 76 ಅನುಷ್ಠಾನದ ಹಂತದಲ್ಲಿವೆ, 51 ಪರಿಶೀಲನೆಯಲ್ಲಿವೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸಂಬಂಧಿಸಿದ 111 ಶಿಫಾರಸ್ಸುಗಳಲ್ಲಿ 37 ಅನುಷ್ಠಾನಗೊಳಿಸಲಾಗಿದೆ. 18 ಅನುಷ್ಠಾನದ ಹಂತದಲ್ಲಿವೆ, 18 ಪರಿಶೀಲನೆಯಲ್ಲಿವೆ. ಸಾರಿಗೆ ಇಲಾಖೆಗೆ ಸಂಬಂಧಿಸಿದ 217 ಶಿಫಾರಸ್ಸುಗಳಲ್ಲಿ 117 ಅನುಷ್ಠಾನಗೊಳಿಸಲಾಗಿದೆ. 4 ಅನುಷ್ಠಾನದ ಹಂತದಲ್ಲಿವೆ ಹಾಗೂ 96 ಪರಿಶೀಲನೆಯಲ್ಲಿವೆ ಎಂದು ವಿವರಣೆ ನೀಡಿದರು. (kp.c)
![](https://i0.wp.com/samajamukhi.net/wp-content/uploads/2021/08/1--scaled.jpg?fit=1810%2C2560&ssl=1)